Toll Free No: 1800-425-0889

Home | Contact

General Body Meeting 2018 - 19

ಎಸ್‍ಸಿಡಿಸಿಸಿ ಬ್ಯಾಂಕ್ ಸಾರ್ವಕಾಲಿಕ ಗರಿಷ್ಠ ರೂ.28.63 ಕೋಟಿ ಲಾಭ, ಶೇ.9.50 ಡಿವಿಡೆಂಡ್ ಘೋಷಣೆ
***

ಮಂಗಳೂರು* ಸಾಧನೆಯ ಮಹಾಪೂರವನ್ನು ಹೊತ್ತುಕೊಂಡು ಸಹಕಾರಕ್ಷೇತ್ರಕ್ಕೆ ಆದರ್ಶವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿದೆ. ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿರುವ ಬ್ಯಾಂಕ್ ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನ ಮನ್ನಣೆ ಗಳಿಸಿ ಜನಸ್ನೇಹಿ ಬ್ಯಾಂಕ್ ಎನ್ನುವ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. ಬ್ಯಾಂಕ್ ಸಹಕಾರಿ ರಂಗದಲ್ಲಿ ವಿಶಿಷ್ಠ ವಿನೂತನ ಸಾಧನೆಯೊಂದಿಗೆ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಗಿ ಜನಾನುರಾಗಿಯಾಗಿದೆ. 2017-18ನೇ ಸಾಲಿನಲ್ಲಿ ಬ್ಯಾಂಕ್ ಸಾರ್ವಕಾಲಿಕ ಗರಿಷ್ಠ ರೂ.28.63 ಕೋಟಿ ಲಾಭ ಗಳಿಸಿ ತನ್ನ ಸದಸ್ಯ ಸಂಘಗಳಿಗೆ ಶೇ.9.50 ಡಿವಿಡೆಂಡ್‍ನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ|| ಎಂ.ಎನ್. ರಾಜೇಂದ್ರ ಕುಮಾರ್‍ರವರು ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಮಾಡಿದ್ದಾ

ಅವರು ಶನಿವಾರ ಬ್ಯಾಂಕಿನ ಸಭಾಭವನದಲ್ಲಿ ನಡೆದ 104ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ಸಾಧನೆಯ 104 ವರ್ಷಗಳನ್ನು ಪೂರೈಸಿ ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ವರದಿ ವರ್ಷದಲ್ಲಿ ಬ್ಯಾಂಕ್ ಸಾಧಿಸಿದ ಯಶಸ್ಸು ಅಭೂತಪೂರ್ವವಾದದ್ದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಿನೇ ದಿನೇ ಸ್ಪರ್ಧೆಯನ್ನು ಎದುರಿಸಿದರೂ ಬ್ಯಾಂಕ್ ಅಭಿವೃದ್ಧಿಯ ಪಥವನ್ನು ಕಂಡು ದೇಶದ ಅಗ್ರಮಾನ್ಯ ಸಹಕಾರಿ ಬ್ಯಾಂಕ್ ಎನಿಸಿಕೊಂಡಿದೆ ಎಂದರು.

ಹೊಸ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ಕøಷ್ಟ ಸೇವೆಯನ್ನು ಬ್ಯಾಂಕ್ ನೀಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇಂಟರ್‍ನೆಟ್, ಕೋರ್ ಬ್ಯಾಂಕಿಂಗ್‍ನಂತಹ ಉನ್ನತ ಸೇವೆಯು ಬ್ಯಾಂಕಿನ 105 ಶಾಖೆಗಳಲ್ಲಿ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ “ಇಂಟರ್ ಬ್ಯಾಂಕಿಂಗ್ ಮೊಬೈಲ್ ಪೇಮೆಂಟ್ ಸಿಸ್ಟಮ್” ಯೋಜನೆಯನ್ನು ಹಾಗೂ “ಇಂಟರ್ ಬ್ಯಾಂಕಿಂಗ್ ಸೇವೆ”ಯನ್ನು ರೂಪಿಸಲು ಬ್ಯಾಂಕ್ ಮುಂದಾಗಿದೆ ಎಂದು ಅವರು ಮಹಾಸಭೆಯಲ್ಲಿ ತಿಳಿಸಿದರು.

ಗುರಿ ಮೀರಿದ ಸಾಧನೆ:

ಸುದೀರ್ಘ ಕಾಲ ಸಾರ್ವಜನಿಕ ಸೇವೆಯಲ್ಲಿರುವ ಎಸ್‍ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಎಲ್ಲಾ ವ್ಯವಹಾರಗಳಲ್ಲೂ ಗುರಿ ಮೀರಿದ ಸಾಧನೆಯನ್ನು ಮಾಡಿದೆ. ಬ್ಯಾಂಕ್ ವರದಿ ವರ್ಷದಲ್ಲಿ ಒಟ್ಟು 6748.84 ಕೋಟಿ ರೂಪಾಯಿ ವ್ಯವಹಾರ ಸಾಧಿಸುವ ಮೂಲಕ ಗುರಿ ಮೀರಿದ ಸಾಧನೆಗೈದಿದೆ. ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಾತಿ ಸಂಗ್ರಹಣೆಯಲ್ಲಿ ಪೈಪೋಟಿ ಇದ್ದರೂ ಬ್ಯಾಂಕ್ 105 ಶಾಖೆಗಳ ಮೂಲಕ ಒಟ್ಟು 3561.24 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ, ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ರಾಜ್ಯದ ಪ್ರಥಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಕೀರ್ತಿಗೆ ಪಾತ್ರವಾಗಿದೆ ಎಂದರು.

ಸ್ಪರ್ಧಾತ್ಮಕ ಆರ್ಥಿಕ ಹಿನ್ನಲೆಯಲ್ಲಿಯೂ ಬ್ಯಾಂಕ್ ಆರ್ಥಿಕ ವರ್ಷದಲ್ಲಿ ಸೇವಾ ಬದ್ಧತೆಯನ್ನು ಮೆರೆದು ರೂ.2,778.30 ಕೋಟಿ ಮುಂಗಡ ನೀಡಿದೆ. 960 ಸಹಕಾರಿ ಸಂಘಗಳು ಬ್ಯಾಂಕಿಗೆ ಸದಸ್ಯರಾಗಿದ್ದು ಪಾಲು ಬಂಡವಾಳ ರೂ.139.33 ಕೋಟಿ, ಬ್ಯಾಂಕಿನ ದುಡಿಯುವ ಬಂಡವಾಳ ರೂ.4844.60 ಕೋಟಿ, ಬ್ಯಾಂಕ್ ರೂ.105.51 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ ಎಂದು ಅವರು ತಿಳಿಸಿದರು.

ಸಾಲ ವಸೂಲಾತಿಯಲ್ಲಿ ದಾಖಲೆ:

ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ ನೂರರ ವಸೂಲಾತಿಯನ್ನು ಕಂಡಿದೆ. ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 23 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 18 ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಸಾಲ ವಸೂಲಾತಿಯಲ್ಲಿ ಶೇಕಡಾ ನೂರರ ಸಾಧನೆ ಮಾಡಿದೆ ಎಂದು ಮಹಾಸಭೆಯಲ್ಲಿ ಅವರು ತಿಳಿಸಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಸಹಾಯ ಗುಂಪುಗಳ ಸಂಘಟನೆಯಲ್ಲೂ ಬ್ಯಾಂಕ್ ಮುಂಚೂಣಿಯಲ್ಲಿದೆ. ಈ ಬ್ಯಾಂಕ್ ಒಟ್ಟು 32,371 ಸ್ವಸಹಾಯ ಗುಂಪುಗಳನ್ನು ವಿವಿಧ ಸಹಕಾರ ಸಂಘಗಳ ಜೋಡಣೆಯ ಮೂಲಕ ರಚಿಸಿಕೊಂಡಿದೆ. ಈ ಗುಂಪುಗಳ ಒಟ್ಟು ಉಳಿತಾಯ ರೂ.104.54 ಕೋಟಿ. ಒಟ್ಟು 32051 ಸ್ವಸಹಾಯ ಗುಂಪುಗಳಿಗೆ ಸಾಲ ಸಂಯೋಜಿಸಲಾಗಿದ್ದು, ಇದರಲ್ಲಿ ರೂ.165.97 ಕೋಟಿ ಸಾಲ ಹೊರಬಾಕಿ ಇರುತ್ತದೆ.

ಅಪೆಕ್ಸ್/ನಬಾರ್ಡ್ ಪ್ರಶಸ್ತಿ:

ಜನಪರ ಯೋಜನೆಗಳೊಂದಿಗೆ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದೇಶದ ಗಮನ ಸೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸರ್ವಾಂಗೀಣ ನಿರ್ವಹಣೆಗೆ ವರದಿ ವರ್ಷದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿ ಸತತ 19 ವರ್ಷಗಳಿಂದ ದೊರೆಯುತ್ತಿರುವುದು ಬ್ಯಾಂಕ್‍ನ ಕಾರ್ಯ ಸಾಧನೆಗೆ ಸಂದ ಪುರಸ್ಕಾರ. ಸ್ವಸಹಾಯ ಗುಂಪುಗಳ ನಿರ್ವಹಣೆಗೂ ಬ್ಯಾಂಕಿಗೆ ನಬಾರ್ಡ್ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿ ಕಳೆದ 17 ವರ್ಷಗಳಿಂದ ಬ್ಯಾಂಕಿಗೆ ಸತತವಾಗಿ ದೊರೆಯುತ್ತಿದೆ ಎಂದು ಅವರು ತಿಳಿಸಿದರು.

ಎಂ.ಎನ್.ಆರ್ ಗೆ ಅಭಿನಂದನೆ

ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ 25 ವಾರ್ಷಿಕ ಮಹಾಸಭೆಯನ್ನು ನಡೆಸಿಕೊಟ್ಟ ಡಾ| ಎಂ.ಎನ್ ರಾಜೇಂದ್ರ ಕುಮಾರ್‍ರವರನ್ನು ಜಿಲ್ಲೆಗಳ ಸಮಸ್ತ ಸಹಕಾರಿಗಳ ಪರವಾಗಿ ಅಭಿನಂದಿಸಲಾಯಿತು. ಈ ಬಗ್ಗೆ ಪ್ರಸ್ತಾವನೆಯನ್ನು ಬ್ಯಾಂಕಿನ ನಿರ್ದೇಶಕರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ನಿರ್ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್.ಆರ್ ಸತೀಶ್ಚಂದ್ರ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾಕರ ಸಹಕಾರ ಒಕ್ಕೂಟ ಇದರ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆ ಕೊಡವೂರು, ದಕ್ಷಿಣ ಕನ್ನಡ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಯಶ್ಪಾಲ್ ಸುವರ್ಣ ಇವರಿಗೆ ಬ್ಯಾಂಕಿನ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕರಾವಳಿ ಸಹಕಾರಿ ಮಾಸಪತ್ರಿಕೆಯ ಸಂಪಾದಕರು ಹಾಗೂ ಜಿಲ್ಲಾ ಸಹಕಾರಿ ಯೂನಿಯನಿನ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ ಇವರು ಅಭಿನಂದಿಸಲಾಯಿತು.

ಶ್ರದ್ಧಾಂಜಲಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇತ್ತೀಚಿಗೆ ನಿಧನ ಹೊಂದಿದ್ದು ಅವರಿಗೆ ಶ್ರದ್ಧಾಂಜಲಿಯನ್ನು ಬ್ಯಾಂಕಿನ ಮಹಾಸಭೆಯಲ್ಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೇರಳ ಹಾಗೂ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತೀವೃಷ್ಠಿಯಲ್ಲಿ ಮಡಿದವರಿಗೂ ಸಭೆಯಲ್ಲಿ ಶ್ರದ್ಧಾಂಜಿಲಿಯನ್ನು ಅರ್ಪಿಸಲಾಯಿತು.

ಸನ್ಮಾನ ಪುರಸ್ಕಾರ:

ಈ ಸಂದರ್ಭದಲ್ಲಿ 2017-18ನೇ ಸಾಲಿನಲ್ಲಿ ಶೇ.100ರ ವಸೂಲಾತಿಯಲ್ಲಿ ಸಾಧನೆಗೈದ 18 ಪ್ರಾಥಮಿಕ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಗೌರವಾರ್ಪಣೆ ಮಾಡಲಾಯಿತು. ಲೆಕ್ಕ ಪರಿಶೋಧನಾ “ಎ” ವರ್ಗ ಮತ್ತು “ಬಿ” ವರ್ಗದ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಆಯ್ದ ತಲಾ 3 ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ 2017-18ನೇ ಸಾಲಿನ ಜಿಲ್ಲಾ ಬ್ಯಾಂಕಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.

2017-18ನೇ ಸಾಲಿನ ಜಿಲ್ಲಾ ಬ್ಯಾಂಕಿನ ಪ್ರೋತ್ಸಾಹಕ ಪ್ರಶಸ್ತಿಯನ್ನು 82 ಸಹಕಾರಿ ಸಂಘಗಳು, 2016-17ನೇ ಸಾಲಿನ ಅಪೆಕ್ಸ್ ಬ್ಯಾಂಕಿನ ಪ್ರಶಸ್ತಿಯನ್ನು 10 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಡೆದಿವೆ. 2017-1ನೇ ಸಾಲಿನ ಪತ್ತಿನ ಸಹಕಾರಿ ಸಂಘಗಳ ಪ್ರಶಸ್ತಿಯನ್ನು 2 ಪತ್ತಿನ ಸಹಕಾರಿ ಸಂಘಗಳು ಮತ್ತು ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ನೀಡುವ ಪ್ರಶಸ್ತಿಯನ್ನು 5 ಪಟ್ಟಣ ಸಹಕಾರಿ ಬ್ಯಾಂಕುಗಳು, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಪ್ರಶಸ್ತಿಗೆ ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಿಂದ ತಲಾ 3 ಸಂಘಗಳು ಪ್ರಶಸ್ತಿಯನ್ನು ಪಡೆದಿವೆ. ಮಹಿಳಾ ಹಾಲು ಉತ್ಪಾದಕರ ಸಂಘಗಳ ಪೈಕಿ ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಿಂದ ತಲಾ 3 ಸಂಘಗಳು ಪ್ರಶಸ್ತಿಯನ್ನು ಸ್ವೀಕರಿಸಿಕೊಂಡಿದೆ.

2017-18ನೇ ಸಾಲಿನ ಜಿಲ್ಲಾ ಬ್ಯಾಂಕ್ ಪ್ರಶಸ್ತಿಗೆ 3 ರೈತ ಸೇವಾ ಕೂಟದ ಮುಖ್ಯ ಸಂಯೋಜಕರಿಗೆ ಪ್ರಶಸ್ತಿಯನ್ನು ನೀಡಲಾಯಿತು. ಮಾತ್ರವಲ್ಲ ವರದಿ ವರ್ಷದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕಿನ 6 ಸಿಬ್ಬಂದಿಗಳು ಹಾಗೂ ಪ್ರಾಥಮಿಕ ಸಹಕಾರಿ ಸಂಘಗಳ 19 ಮಂದಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿವೃತ್ತಿಯನ್ನು ಹೊಂದಿದ್ದು ಇವರಿಗೆ ಬ್ಯಾಂಕಿನಿಂದ ತಲಾ 50,000/-ವನ್ನು ನೀಡಿ ಗೌರವಿಸಲಾಯಿತು. ಬ್ಯಾಂಕಿನ ಪ್ರಗತಿಯಲ್ಲಿ ಗುರಿ ಮೀರಿದ ಸಾಧನೆಗೈದ 42 ಶಾಖಾ ವ್ಯವಸ್ಥಾಪಕರುಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.

ಈ ಸಭೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ, ಶ್ರೀ ಬಿ. ನಿರಂಜನ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ್ ಭಟ್, ಶ್ರೀ ಬಿ. ರಘುರಾಮ ಶೆಟ್ಟಿ, ಶ್ರೀ ಎಂ. ವಾದಿರಾಜ ಶೆಟ್ಟಿ, ಶ್ರೀ ಕೆ.ಎಸ್. ದೇವರಾಜ್, ಶ್ರೀ ಸದಾಶಿವ ಉಳ್ಳಾಲ್, ಶ್ರೀ ರಾಜು ಪೂಜಾರಿ, ಶ್ರೀ ಶಶಿಕುಮಾರ್ ರೈ ಬಿ, ಶ್ರೀ ಬಿ. ರಾಜೇಶ್ ರಾವ್, ಶ್ರೀ ಎಸ್.ಬಿ. ಜಯರಾಮ ರೈ, ಶ್ರೀ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಶ್ರೀ ರಮೇಶ್ ಶೆಟ್ಟಿ, ಸಹಕಾರಿ ಸಂಘಗಳ ಉಪನಿಬಂಧಕರುಗಳಾದ ಶ್ರೀ ಬಿ.ಕೆ. ಸಲೀಂ, ಶ್ರೀ ಪ್ರವೀಣ್ ನಾಯಕ್, ನಬಾರ್ಡ್ ಡಿಜಿಎಂ ಶ್ರೀ ರಮೇಶ್, ಬ್ಯಾಂಕಿನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ, ಮಹಾ ಪ್ರಬಂಧಕರಾದ ಶ್ರೀ ಗೋಪಾಲಕೃಷ್ಣ ಭಟ್ ಹಾಗೂ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು,

ಬ್ಯಾಂಕಿನ ನಿರ್ದೇಶಕರಾದ ಶ್ರೀ ಟಿ.ಜಿ.ರಾಜಾರಾಮ್ ಭಟ್ ಸ್ವಾಗತಿಸಿದರು. ಬ್ಯಾಂಕಿನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ. ವಂದಿಸಿದರು. ಮಹಾ ಪ್ರಬಂಧಕರಾದ ಶ್ರೀ ಶ್ರೀ ಗೋಪಾಲಕೃಷ್ಣ ಭಟ್ ಇವರು ಕಾರ್ಯಕ್ರಮ ನಿರೂಪಿಸಿದರು.

*****