Toll Free No: 1800-425-0889

Home | Contact

Chairman's Message


Dr.M.N.Rajendra Kumar

“ಸಾಧನೆ”ಯ ಮಹಾಪೂರವನ್ನು ಹೊತ್ತುಕೊಂಡು ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿ ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿರುವ ನಮ್ಮ ಬ್ಯಾಂಕ್ ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನಮನ್ನಣೆ ಗಳಿಸಿಕೊಂಡಿದೆ. ಹಲವಾರು ರಚನಾತ್ಮಕ ಚಟುವಟಿಕೆಗಳೊಂದಿಗೆ ಸಹಕಾರ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ‘ಜನಸ್ನೇಹಿ’ ಬ್ಯಾಂಕ್ ಆಗಿ ಜನಾನುರಾಗಿಯಾಗಿದೆ.

ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 108 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, ಸಾಧನೆಯ ಶಿಖರದಲ್ಲಿದೆ. ವರದಿ ವರ್ಷದಲ್ಲಿ ಬ್ಯಾಂಕ್ ತನ್ನ ಕಾರ್ಯದಕ್ಷತೆಯನ್ನು ಅದ್ಭುತವಾಗಿ ಮೆರೆದು, ಬ್ಯಾಂಕಿಂಗ್ ಸೇವೆಯಲ್ಲಿ ಅಪೂರ್ವ ದಾಖಲೆಯನ್ನು ನಿರ್ಮಿಸಿ, ಸಾಧಿಸಿದ ಯಶಸ್ಸು ಅಪೂರ್ವವಾದದ್ದು. ಈ ಯಶಸ್ಸಿನ ಮೂಲ ಸೆಲೆಗೆ ಗೌರವಾನ್ವಿತರಾದ ತಾವೆಲ್ಲರೂ ಕಾರಣಕರ್ತರು ಎನ್ನುವುದನ್ನು ಸ್ಮರಿಸುತ್ತಾ, ತಮ್ಮೆಲ್ಲರನ್ನು ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಗೆ ಆಡಳಿತ ಮಂಡಳಿಯ ಪರವಾಗಿ ಹಾಗೂ ನನ್ನ ವೈಯಕ್ತಿಕ ನೆಲೆಯಲ್ಲಿ ಗೌರವಪೂರ್ವಕವಾಗಿ ಸ್ವಾಗತ್ತಿಸುತ್ತೇನೆ.

ಹೊಸತನದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅಳವಡಿಸಿ ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ಬ್ಯಾಂಕ್ ನೀಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇಂಟರ್‍ನೆಟ್, ಕೋರ್ ಬ್ಯಾಂಕಿಂಗ್‍ನಂತಹ ಉನ್ನತ ಸೇವೆಯು ಬ್ಯಾಂಕಿನ 113 ಶಾಖೆಗಳಲ್ಲಿ ದೊರೆಯುತ್ತಿದೆ. ವರದಿ ವರ್ಷದಲ್ಲಿ ಮೊಬೈಲ್ ಆ್ಯಪ್, ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬ್ಯಾಂಕ್ ಗ್ರಾಹಕರಿಗೆ ಪರಿಚಯಿಸಿದೆ. ಮುಂದಿನ ದಿನಗಳಲ್ಲಿ “ಇಂಟರ್ ಬ್ಯಾಂಕಿಂಗ್ ಮೊಬೈಲ್ ಪೇಮೆಂಟ್ ಸಿಸ್ಟಮ್” ಯೋಜನೆಯನ್ನು ಹಾಗೂ “ಇಂಟರ್ ಬ್ಯಾಂಕಿಂಗ್ ಸೇವೆ”ಯನ್ನು ರೂಪಿಸಲು ಬ್ಯಾಂಕ್ ಮುಂದಾಗಿದೆ. ಏಕರೂಪದ ತಂತ್ರಾಂಶವನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕಾಮನ್ ಸಾಫ್ಟ್‍ವೇರ್‍ನ್ನು ಅಳವಡಿಸುವ ಕಾರ್ಯಯೋಜನೆ ಅನುಷ್ಠಾನದಲ್ಲಿದೆ.

ಸಾರ್ವಜನಿಕ ಸೇವೆಯಲ್ಲಿ ಸುದೀರ್ಘ ಕಾಲ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಎಲ್ಲಾ ವ್ಯವಹಾರಗಳಲ್ಲೂ ಗುರಿ ಮೀರಿದ ಸಾಧನೆಯನ್ನು ಮಾಡಿದೆ. 31-03-2022ಕ್ಕೆ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.50.49 ಕೋಟಿ ಲಾಭ ಗಳಿಸಿರುವುದು ಪ್ರಗತಿಯ ಸಂಕೇತವಾಗಿದೆ. ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿಯೂ ಬ್ಯಾಂಕ್ ಗರಿಷ್ಠ ಲಾಭ ಗಳಿಸಿ ಸಾಧನೆಯ ಪಥದಲ್ಲಿದೆ.

ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ವರದಿ ವರ್ಷದಲ್ಲಿ ರೂ.11608.04 ಕೋಟಿಗಳ ಒಟ್ಟು ವ್ಯವಹಾರ ದಾಖಲಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಾತಿ ಸಂಗ್ರಹಣೆಯಲ್ಲಿ ಪೈಪೋಟಿ ಇದ್ದರೂ ನಮ್ಮ ಬ್ಯಾಂಕ್ 113 ಶಾಖೆಗಳ ಮೂಲಕ ಒಟ್ಟು ರೂ.5651.17 ಕೋಟಿ ಠೇವಣಿ ಸಂಗ್ರಹಿಸಿ, ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ರಾಜ್ಯದ ಪ್ರಥಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಕೀರ್ತಿಗೂ ಪಾತ್ರವಾಗಿದೆ.

ಸ್ಪರ್ಧಾತ್ಮಕ ಆರ್ಥಿಕ ಹಿನ್ನಲೆಯಲ್ಲಿಯೂ ಬ್ಯಾಂಕ್ ಆರ್ಥಿಕ ವರ್ಷದಲ್ಲಿ ಸೇವಾ ಬದ್ಧತೆಯನ್ನು ಮೆರೆದು ರೂ.4516.63 ಕೋಟಿ ಮುಂಗಡ ನೀಡಿದೆ. 1031 ಸಹಕಾರಿ ಸಂಘಗಳು ಬ್ಯಾಂಕಿಗೆ ಸದಸ್ಯರಾಗಿದ್ದು ಪಾಲು ಬಂಡವಾಳ ರೂ.275.98 ಕೋಟಿ, ಬ್ಯಾಂಕಿನ ದುಡಿಯುವ ಬಂಡವಾಳ ರೂ.8668.90 ಕೋಟಿ, ಬ್ಯಾಂಕ್ ರೂ.230.34 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ.

ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ ನೂರು ಮರುಪಾವತಿಯನ್ನು ಕಂಡಿವೆ. ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 27 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 14. ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಸಾಲ ವಸೂಲಾತಿಯಲ್ಲಿ ಶೇಕಡಾ ನೂರರ ಸಾಧನೆ ಮಾಡಿದೆ. ಈ ಸಂದರ್ಭದಲ್ಲಿ ಈ ಸಹಕಾರಿ ಸಂಸ್ಥೆಗಳ ಆಡಳಿತ ಹಾಗೂ ಸಿಬ್ಬಂದಿ ವರ್ಗವನ್ನು ಆಭಿನಂದಿಸುತ್ತೇನೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಸಹಾಯ ಗುಂಪುಗಳ ಸಂಘಟನೆಗೆ ಭದ್ರ ನೆಲೆಯನ್ನು ಒದಗಿಸಿದ ಈ ಬ್ಯಾಂಕ್ ಒಟ್ಟು 33,306 ಸ್ವಸಹಾಯ ಗುಂಪುಗಳನ್ನು ವಿವಿಧ ಸಹಕಾರ ಸಂಘಗಳ ಜೋಡಣೆಯ ಮೂಲಕ ರಚಿಸಿಕೊಂಡಿದೆ. ಈ ಗುಂಪುಗಳ ಒಟ್ಟು ಉಳಿತಾಯ ರೂ.120.85 ಕೋಟಿ. 32,821 ಸ್ವಸಹಾಯ ಗುಂಪುಗಳಿಗೆ ಸಾಲ ಸಂಯೋಜಿಸಲಾಗಿದ್ದು, ರೂ.321.31 ಕೋಟಿ ಸಾಲ ಹೊರಬಾಕಿ ಇರುತ್ತದೆ.

ಜನಪರ ಯೋಜನೆಗಳೊಂದಿಗೆ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದೇಶದ ಗಮನ ಸೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸರ್ವಾಂಗೀಣ ನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ 19 ಬಾರಿ ದೊರೆತಿದೆ. ಸ್ವಸಹಾಯ ಗುಂಪುಗಳ ನಿರ್ವಹಣೆಗೂ 18 ಬಾರಿ ನಬಾರ್ಡ್ ಪ್ರಶಸ್ತಿ ಬ್ಯಾಂಕಿಗೆ ದೊರೆತಿದೆ. ವರದಿ ವರ್ಷದಲ್ಲಿ ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಪ್ರತಿಷ್ಠಿತ “ಬ್ಯಾಂಕೋ ಬ್ಲೂ ರಿಬ್ಬನ್-2021” ಪ್ರಶಸ್ತಿ ಲಭಿಸಿದೆ. 2021-22ನೇ ಸಾಲಿನಲ್ಲಿ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ನಮ್ಮ ಬ್ಯಾಂಕಿಗೆ “ಎಪಿವೈ ರಾಷ್ಟ್ರೀಯ ಪ್ರಶಸ್ತಿ” ಬಂದಿರುವುದು ಸಂತೋಷದ ವಿಚಾರ.

ಸಹಕಾರ ಸಂಸ್ಥೆಗಳ ಆರ್ಥಿಕ ಬಲವರ್ಧನೆಗೆ ಸದಾ ಮುಂದಾಗಿರುವ ಈ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಯೊಂದಿಗೆ ಗುರುತಿಸಿಕೊಂಡಿದೆ. ಈ ಸಾಧನೆಗಳ ಸಾಧನಾ ಶಕ್ತಿಗಳು ಉಭಯ ಜಿಲ್ಲೆಗಳ ಸಮಸ್ತ ಜನತೆ ಮತ್ತು ಸಹಕಾರಿ ಬಂಧುಗಳು ಎನ್ನುವುದನ್ನು ಸ್ಮರಿಸುತ್ತಾ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ರಾಜ್ಯದ ಕೃಷಿಕರ ಸರ್ವತೋಮುಖ ಏಳಿಗೆಯ ದೃಷ್ಠಿಯಿಂದ ರಾಜ್ಯ ಸರಕಾರ ವರದಿ ವರ್ಷದಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ರೂ.3.00 ಲಕ್ಷದವರೆಗೆ ಬೆಳೆಸಾಲ ಹಾಗೂ ರೂ.10.00 ಲಕ್ಷದವರೆಗೆ ಶೇ.3 ಬಡ್ಡಿ ದರದಲ್ಲಿ ಮಧ್ಯಮಾವಧಿ/ದೀರ್ಘವಾಧಿ ಕೃಷಿ ಸಾಲವನ್ನು ನೀಡಲು ಸಹಕರಿಸಿದ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ಮತ್ತು ಮಾನ್ಯ ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಎಸ್.ಟಿ.ಸೋಮಶೇಖರ್‍ರವರಿಗೆ, ಸಚಿವ ಸಂಪುಟದ ಸದಸ್ಯರೆಲ್ಲರಿಗೂ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತಾ ಅವರ ಸಹಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಸೂಕ್ತ ಸಮಯದಲ್ಲಿ ಬ್ಯಾಂಕಿನ ಕಾರ್ಯ ನಿರ್ವಹಣೆಗೆ ಸಲಹೆ ಸೂಚನೆ ನೀಡಿದ ನಬಾರ್ಡ್ ಸಂಸ್ಥೆ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ.

ಈ ಬ್ಯಾಂಕಿನ ಶ್ರೇಯಸ್ಸಿಗೆ ಸಹಕರಿಸಿದ ಉಭಯ ಜಿಲ್ಲೆಗಳ ಎಲ್ಲಾ ಜನ ಪ್ರತಿನಿಧಿಗಳಿಗೆ, ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿಗೆ, ಸಹಕಾರಿ ಇಲಾಖಾಧಿಕಾರಿಗಳಿಗೆ, ಸರಕಾರಿ ಅಧಿಕಾರಿಗಳಿಗೆ, ಉಭಯ ಜಿಲ್ಲಾ ಸಹಕಾರಿ ಒಕ್ಕೂಟಗಳಿಗೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮತ್ತು ವಿವಿಧ ಸಹಕಾರಿ ಸಂಘ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರುಗಳಿಗೆ ಹಾಗೂ ಬ್ಯಾಂಕಿನ ಗೌರವಾನ್ವಿತ ಗ್ರಾಹಕರು ಮತ್ತು ರೈತಾಪಿ ಬಂಧುಗಳಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಬ್ಯಾಂಕಿನ ಪ್ರಗತಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಪತ್ರಿಕಾ ಮಾಧ್ಯಮದವರನ್ನು ಆಡಳಿತ ಮಂಡಳಿಯ ಪರವಾಗಿ ಮತ್ತು ನನ್ನ ವೈಯಕ್ತಿಕ ನೆಲೆಯಲ್ಲಿ ಹೃತ್ಪೂರ್ವಕವಾಗಿ ವಂದಿಸುತ್ತೇನೆ. ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದ ಪ್ರಾಮಾಣಿಕ ಕರ್ತವ್ಯಕ್ಕಾಗಿ ಅವರನ್ನು ಅಭಿನಂಧಿಸುತ್ತಾ ಈ ಬ್ಯಾಂಕ್‍ನ್ನು ಮತ್ತಷ್ಟು ಸದೃಢತೆಯಲ್ಲಿ ಮುನ್ನಡೆಸಲು ತಮ್ಮೆಲ್ಲರ ಸಹಕಾರವನ್ನು ಅಪೇಕ್ಷಿಸುತ್ತೇನೆ.

|| ಜೈ ಸಹಕಾರ ||

ಡಾ|| ಎಂ. ಎನ್. ರಾಜೇಂದ್ರ ಕುಮಾರ್
ಅಧ್ಯಕ್ಷರು